ಯುಗಾದಿ ಅಂದರೆ…. ಹೊಸವರ್ಷದ ಆರಂಭ. ಜಗತ್ತು ಮುಂದುವರಿಯ ಬೇಕೆಂದರೆ ಎಲ್ಲವೂ ಮರಳಿ ಸಂಭವಿಸ ಬೇಕು. ಕಾಲದ ಹುಟ್ಟು, ಪ್ರಕೃತಿಯ ಚೈತನ್ಯ, ಮನುಷ್ಯನ ಸಂಕಲ್ಪ, ಬದುಕು, ಬೆಳೆಗಳು ಎಲ್ಲವೂ ಹೊಸ ಕುಡಿಗಳೊಂದಿಗೆ ಮರಳಿ ಹುಟ್ಟಬೇಕು,ಹೊಸತನ್ನುಪ್ರತಿಪಾದಿಸಬೇಕು. ಪ್ರಕೃತಿಯ ಚಿಗುರು,ಹೂ,ಹೊಸ ಕುಹೂ, ಸಂತೋಷ, ಸಂಭ್ರಮ ಇತ್ಯಾದಿ ಎಲ್ಲ ಹೊಸತನ್ನೂ ಕಾಲದಲ್ಲಿ ಗುರುತಿಸಿ ಆ ಸಂತೋಷವನ್ನು ಆಚರಿಸುತ್ತ, ಬರುವ ವರ್ಷದ ದಿವಸಗಳೆಲ್ಲ ಸಂತೋಷವಾಗಿ, ಸಮತೋಲಿತವಾಗಿ ಕಳೆಯಲೆಂದು ಆಶಿಸಿ ಸಮಾಜದ ಜನರೆಲ್ಲ ಒಟ್ಟುಗೂಡಿ ಆಚರಿಸುವ ಹಬ್ಬವೇ ಯುಗಾದಿ. ಈ ಹಂಬಲದೊಂದಿಗೆ ಮತ್ತೆ ಮರಳಿ ಬರುತ್ತಿದೆ ಇದೋ ಈ ಯುಗಾದಿಯ ಸಂಭ್ರಮ.


ಮಾರ್ಚ್ 20 ರಂದು ಪಾಶ್ಚಾತ್ಯ ದೇಶಗಳು ಅವರ ಕ್ಯಾಲೆಂಡರಿನ ಪ್ರಕಾರ ಅಧಿಕೃತವಾಗಿ ವಸಂತ ಋತುವಿಗೆ ಕಾಲಿಡುತ್ತವೆ. ಅದರ ಜೊತೆಯಲ್ಲೇ ಬರುವ ಯುಗಾದಿಗೆ ಸರಿಯಾಗಿ ಪ್ರಕೃತಿ ಹೊಸ ಹಸಿರು-ಚಿಗುರಿನ ಅಂಗಿತೊಟ್ಟು ಸಂಭ್ರಮಿಸುವ ಮುದ್ದು ಮಗುವೊಂದರಂತೆ ಕಂಗೊಳಿಸುವುದು, ಅಲ್ಲಿ ಸಂಭ್ರಮದ ಹೊಸ ಚೈತನ್ಯವನ್ನು ಮೂಡಿಸುತ್ತದೆ. ಹಾಗಾಗಿ ಯುಗಾದಿಯ ತತ್ವದ ಈಸ್ಟರ್ ಎನ್ನುವ ಹಬ್ಬವನ್ನು ಅವರು ಆಚರಿಸುತ್ತಾರೆ.ಭಾರತದಲ್ಲಿ ಜನರು ಈಗ ಬೇಸಿಗೆಯ ದಿನಗಳಲ್ಲಿದ್ದರೆ ಪಾಶ್ಚಾತ್ಯರು ಜನರು ವಸಂತದ ಎಳೆ ಬಿಸಿಲಿನ ನವೋಲ್ಲಾಸಕ್ಕೆ ತೆರೆದುಕೊಳ್ಳುತ್ತಿರುತ್ತಾರೆ. ಒಟ್ಟಿನಲ್ಲಿ ಅನಿವಾಸಿಯಾದ ನನಗೆ ಯುಗಾದಿ ಹಬ್ಬ ನೀಡುವುದು ವಸಂತದ ಸಂಭ್ರಮವನ್ನು ಅಂದರೆ ತಪ್ಪಾಗಲಾರದು.
ಹಬ್ಬಗಳುಸಮಾಜದ ಅತಿಮುಖ್ಯ ಅಂಗ ಗಳು.ಹಬ್ಬಗಳ ಇರುವುಸಮುದಾಯಯದ ಒಗ್ಗಟ್ಟನ್ನು, ಆರೋಗ್ಯದ ಸುಸ್ಥಿತಿಯನ್ನು ಬಿಂಬಿಸುತ್ತದೆ. ಹಬ್ಬಗಳು ಸಮಾಜದ ಜನರ ಚೈತನ್ಯವನ್ನು ಒಗ್ಗೂಡಿಸಿ,ಸಮುದಾಯದಲ್ಲಿ ಸಾರ್ಥಕತೆಯನ್ನು ತುಂಬುತ್ತವೆ. ನಮ್ಮ ನಾಡಿನ ಮತ್ತು ದೇಶದ ಬಹುತೇಕ ಹಿಂದೂ ಹಬ್ಬಗಳು ದೇವರ ಕಥೆ-ಉಪಕಥೆಗಳ ಆಧಾರದ ಮೇಲೆ ಸೃಷ್ಟಿಯಾದವು.ಇವುಗಳ ಜೊತೆ,ಪ್ರಕೃತಿಯ ಬದಲಾವಣೆಗಳ ಆಧಾರದ ಮೇಲೂ ಕೆಲವು ಹಬ್ಬಗಳು ಸೃಷ್ಟಿಯಾಗಿವೆ. ಕೃಷಿಯನ್ನು ಅಧರಿಸಿದ ರೈತಾಪಿ ಹಬ್ಬಗಳೂ ಇವೆ.ಆದರೆ ಸೃಷ್ಟಿಲೋಕದ ಕಾಲ ಮಾಪನ ವನ್ನು ಆಧರಿಸಿ ಬರುವ ಕೆಲವೇ ಹಬ್ಬಗಳಲ್ಲಿ ಯುಗಾದಿ ಅತ್ಯಂತ ಮುಖ್ಯವಾದ್ದು.
ಸೂರ್ಯ-ಚಂದ್ರರ ಪಥ ಗತಿಯನ್ನು ಅನುಸರಿಸಿ ಧರಿತ್ರಿ ಹೊಸ ಉಡುಗೆ ತೊಡುವ ಚೈತ್ರ ಮಾಸಕ್ಕೆ ಮತ್ತು ವಸಂತ ಋತುವಿಗಂತೂ ವರ್ಷದಲ್ಲಿ ಇನ್ನಿಲ್ಲದ ಪ್ರಾಧಾನ್ಯತೆ. ಭಾರತವೇ ಅಲ್ಲದೆ ಇತರೆ ದೇಶಗಳಲ್ಲೂ ಬೇರೆ ಬೇರೆ ಹೆಸರಿನಲ್ಲಿ ಈ ವಸಂತ ಋತುವಿಗೆ ಸ್ವಾಗತ ಸಿಗುತ್ತದೆ. ಅದರಿಂದಲೇ ಹೊಸವರ್ಷದ ಆರಂಭ ವೆಂದು ನಮ್ಮ ಹಿರಿಯರು ನಂಬಿದ ಸಂಪ್ರದಾಯವನ್ನೇ ನಾವು ಯುಗಾದಿ ಮತ್ತು ಇತರೆ ಹೆಸರುಗಳಲ್ಲಿ ಹಬ್ಬವಾಗಿ ಆಚರಿಸುತ್ತೇವೆ.

ಚಳಿಗಾಲದ ಕತ್ತಲೆ, ಕಡಿಮೆ ಬೆಳಕು, ಸಣ್ಣ ದಿನಗಳನ್ನು ತೊಡೆದು ಚೈತ್ರ ಮಾಸ ತರುವ ಉಲ್ಲಾಸ ಅವರ್ಣನೀಯವಾದ್ದು. ಈ ಸಂಭ್ರಮದ ದಿಬ್ಬಣ ಶುರುವಾಗುವುದೇ ಯುಗಾದಿಯ ದಿನ. ನವೋಲ್ಲಾಸ, ಹೊಸ ಚಿಗುರಿನ ಜೊತೆ ಆಗ ತಾನೆ ಹುಟ್ಟಿ ಚಂಗನೆಂದು ನೆಗೆವ ಸಣ್ಣ ಮರಿಗಳಿಂದ ಹಿಡಿದು,ಪುಟ್ಟ ಮಕ್ಕಳು, ಮುದುಕರು ಎಲ್ಲರೂ ಯುಗಾದಿಯ ಸಮಯದಲ್ಲಿ ನವ ಮುನ್ನುಡಿಯನ್ನು ಬರೆಯುತ್ತಾರೆ.ಸುತ್ತಲಿನ ಪರಿಸರದಲ್ಲೆಲ್ಲ ಪ್ರಸನ್ನತೆಯನು ಹರಡಿ, ಹೊಸ ಉಲ್ಲಾಸವನ್ನು ತುಂಬಿ ಬದುಕನ್ನು ಮತ್ತೆ ಪ್ರಚೋದಿಸುವ ಈ ಕಾಲವನ್ನು ಯುಗದ ಆದಿಯೆಂದೂ, ಹೊಸವರ್ಷ ವೆಂದೂ ನಮ್ಮ ಸಮಾಜ ಗುರುತಿಸಿರುವುದ ರಲ್ಲಿ ಅಪಾರವಾದ ಅರ್ಥ ಅಡಗಿದೆ.
ಪ್ರತಿ ದಿನವೂ ಹೊಸತೇ ಆದರೂ, ಕಾಲವನ್ನು ಗುಣಿಸುವವರು ಹಲವಾರು ವರ್ಷಗಳನ್ನು ಒಂದು ಕಾಲಾವಧಿಯಡಿ ಗುರುತಿಸಿ ಅದನ್ನು ಸಂವತ್ಸರವೆಂದು ಕರೆದಿದ್ದಾರೆ. ಈ ಪ್ರತಿ ಸಂವತ್ಸರದಲ್ಲಿ 60 ವರ್ಷಗಳನ್ನು ಕೂಡಿಹಾಕುತ್ತಾರೆ.ಈ ಗಣನೆಯ ಪಂಚಾಂಗದ ಪ್ರಕಾರ ವರ್ಷದ ಮೊದಲ ತಿಂಗಳೇ ಚೈತ್ರಮಾಸ. ಸಂಸ್ಕೃತ ಪದವಾದ ಯುಗ(ಕಾಲ) ಆದಿ(ಶುರುವಾತು) ಇನ್ನೂ ಕ್ಲಿಪ್ತವಾಗಿ ಹೇಳಬೇಕೆಂದರೆ ಕಲಿಯುಗದಲ್ಲಿ ಮಾತ್ರ ಆರಂಭವಾದ ಹಬ್ಬ. ಕಲಿಯುಗ ಶುರುವಾದ್ದು ಕೃಷ್ಣ ಈ ಲೋಕವನ್ನು ಬಿಟ್ಟು ತೆರಳಿದ ಬಳಿಕ. ಮಹರ್ಷಿ ವೇದವ್ಯಾಸರು ಇದನ್ನು ಹೀಗೆ ಹೇಳಿದ್ದಾರೆ:

“ ಯೆಸ್ಮಿನ್ ಕ್ರಿಷ್ಣೋ ದಿವಂವ್ಯತಃ, ತಸೇವ ಪ್ರತಿ ಪನ್ನಂ ಕಲಿಯುಗಃ ಎನ್ನುತ್ತಾರೆ.

ಈ ಕಲಿಯುಗ ಶುರುವಾದ್ದು 3102 ಬಿಸಿಇ ಯ ಫೆಬ್ರವರಿ 17-18 ನೇ ತಾರೀಖಿನಂದಂತೆ.

ಗೌತಮೀಪುತ್ರ ಶತಕರ್ಣಿ, ಶತವಾಹನದ ರಾಜ ವಸಂತಕಾಲದ ಈ ಮಹತ್ತನ್ನು ಗುರುತಿಸಿ ಯುಗಾದಿಯ ಆಚರಣೆಯನ್ನು ಶುರುಮಾಡಿದ ಎಂದು ನಂಬುವ ಚರಿತ್ರ ಕಾರರಿದ್ದಾರೆ. ಇದೇ ರಾಜವಂಶಜರು ಕರ್ನಾಟಕ, ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳನ್ನು ಆಳಿದ ಕಾರಣ ಈ ಹಬ್ಬವನ್ನು ಮುಖ್ಯವಾಗಿ ಈ ಮೂರು ರಾಜ್ಯಗಳಲ್ಲಿ ಆಚರಿಸುತ್ತಾರೆ. ಮಹಾರಾಷ್ಟ್ರ ದಲ್ಲಿ ಇದನ್ನು ‘ಗುಡಿಪಾಡ್ವ’ ಎಂದು ಕರೆಯುತ್ತಾರೆ.ಇದೇ ದಿನವನ್ನು ಉತ್ತರಭಾರತದವರು ‘ಚೈತ್ರ ನವರಾತ್ರಿ’ ಹಬ್ಬದ ಮೊದಲ ದಿನವಾಗಿ ಆಚರಿಸುತ್ತಾರೆ. ರಾಜಾಸ್ಥಾನದಲ್ಲಿ ‘ತಪ್ನಾ’ ಎನ್ನುವ, ಸಿಂಧಿಗಳು ‘ಚೇತಿ ಚಂದ್’ ಎನ್ನುವ ಮಣಿಪುರದವರು ‘ಸಜಿಬು ನೊನ್ಗ್ಮ ಪನ್ಬ’ ಎನ್ನುವ ಹೆಸರಿನ ಹಬ್ಬಗಳನ್ನು ಹೊಸವರ್ಷದ ಹೆಸರಲ್ಲಿ ಇದೇ ದಿನ ಆಚರಿಸಿದರೆ, ಬಾಲಿ ಮತ್ತು ಇಂಡೋನೇಶಿಯಾದಲ್ಲಿರುವ ಹಿಂದೂಗಳು ‘ನ್ಯೇಪಿ’ ಎನ್ನುವ ಹೆಸರಲ್ಲಿ ಯುಗಾದಿಯ ತತ್ವ ಇರುವ ಹಬ್ಬವನ್ನು ಆಚರಿಸುತ್ತಾರೆ.


ಚಂದ್ರಮಾನ ಯುಗಾದಿ’ ಮತ್ತು ‘ಸೂರ್ಯಮಾನ ಯುಗಾದಿ’ ಗಳೆಂದು ಎರಡು ಬಗೆಯನ್ನು ಯುಗಾದಿಯಲ್ಲಿ ಜನರು ಆಚರಿಸಿದರೂ ಚೈತ್ರ ಶುದ್ದ ಪಾಡ್ಯಮಿ ಸೂಚಿಸುವುದು ಚಂದ್ರಮಾನ ಯುಗಾದಿಯನ್ನು. ಪ್ರಕಾಶಮಯವಾದ ಚೈತ್ರದ ಆಮೇಲಾರ್ಧದ ಮೊದಲನ್ನು ಯುಗಾದಿಯ ದಿನ ಸೂಚಿಸುತ್ತದೆ.
ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ, ಕೇರಳ, ತಮಿಳುನಾಡು ಗಳಲ್ಲಿ ಸೌರಮಾನದ ರಿತ್ಯ ಯುಗಾದಿ ಆಚರಿಸುತ್ತಾರೆ. ಸೌರಮಾನ ಯುಗಾದಿ ಯನ್ನು ಸೂರ್ಯ ಭಗವಾನನು ಮೇಷ ರಾಶಿಯನ್ನು ಪ್ರವೇಶಿಸುವ ದಿನದಿಂದ ಆಚರಿಸುತ್ತಾರೆ. ‘ಬಾರ್ಹಸ್ಪತ್ಯಮಾನ’ ಎಂಬ ಆಚರಣೆಯೂ ಭಾರತದಲ್ಲಿ ಚಾಲ್ತಿಯಲ್ಲಿದೆ.

ಪ್ರಕೃತಿಯ ನಾಲ್ಕು ಕಾಲಗಳು ತಮ್ಮಿಂದ ತಾವೇ ಪುನರಾವರ್ತಿತವಾಗುತ್ತಲೇ ಬಂದಿವೆ. ಆದರೆ ಮಾನವನಿಗೆ ಅದನ್ನು ಅಳೆಯುವ ಬಯಕೆ. ಆಯಾ ಕಾಲಗಳಲ್ಲಿ ನಡೆವ ಪ್ರಕೃತಿಯ ವಿದ್ಯಮಾನಗಳನ್ನು ಗಮನಿಸಿ, ಅದಕ್ಕೆ ಸೂಕ್ತ ಹೆಸರಿಟ್ಟು ಅದರ ಸಂಭ್ರಮಗಳಲ್ಲಿ ತಾನು ಕೂಡ ಭ್ರಮಿತ ನಾಗುವ ಬಯಕೆ. ಈ ಪರಿಭ್ರಮಣೆಯ ಪರಿಣಾಮವೇ ಯುಗಾದಿ ಹಬ್ಬದ ಆಚರಣೆಗೆ ಕಾರಣ. ಮನುಜನಲ್ಲಿ ಕೂಡ ಒಂದು ರೀತಿಯಲ್ಲಿ ಭಾವ ಪುನರುತ್ಥಾನ ವಾಗುವ ಕಾಲವಿದು. ಜೀವನದ ಅನುಭವ ವಿರುವ ಹಿರಿಯರು, ಬದುಕನ್ನು ಅದರ ನಿಜರೂಪದಲ್ಲಿ ನೋಡಿದವರು ಕಾಲದಲ್ಲಿ ಒಳಿತೂ-ಕೆಡುಕೂ ಇರುವುದನ್ನು ಗಮನಿಸಿ ಅದನ್ನು ಜೀವನದ ಬೇವು (ಕಹಿ) ಬೆಲ್ಲ (ಸಿಹಿ)ಗಳಲ್ಲಿ ಗುರುತಿಸಿದ್ದಾರೆ. ಅವೆರಡೂ ಸಮನಾಗಿದ್ದಲ್ಲಿ ಬದುಕು ಸಮತೋಲನ ವಾಗಿರಬಲ್ಲದು ಎಂಬ ಅಪಾರವಾದ ಅರಿವನ್ನು ತೋರುತ್ತ, ಅಷ್ಟನ್ನಾದರೂ ಅನುಗ್ರಹಿಸು ಎಂಬ ಬೇಡಿಕೆಯನ್ನು ದೇವನ ಮುಂದಿಡುತ್ತ ಯುಗಾದಿಯಲ್ಲಿ ದೇವರನ್ನು ಅನುನಯಿಸುತ್ತಾರೆ. ಜನ ಸಮುದಾಯ ಗಳಲ್ಲಿ, ಸಮಾಜದಲ್ಲಿ, ಕುಟುಂಬಗಳಲ್ಲಿ, ಪ್ರಕೃತಿಯಲ್ಲಿ ವರ್ಷದ ಕಾಲಾವಧಿಯಲ್ಲಿ ಆಗಿರಬಹುದಾದ ಹಲವು ಒಳ್ಳೆಯ-ಕೆಟ್ಟ ಘಟನೆಗಳು ಬದುಕಿನ ಸಹಜವಾದ ಕ್ರಿಯೆ ಎಂದು ಸಾರುವಲ್ಲಿ ಅಪಾರ ಪ್ರಬುದ್ಧತೆ ಯನ್ನು ಮನುಜ ಈ ಹಬ್ಬದ ಮೂಲಕ ಮೆರೆದಿದ್ದಾನೆ.ಯುಗಾದಿಯಲ್ಲಿ ಇದೇ ತಿಳಿವಿನ ಹೂರಣವನ್ನು ಒಬ್ಬಟ್ಟಿನಲ್ಲಿಟ್ಟು ತಟ್ಟಿದ್ದಾನೆ.

ಪುಳಿಯೋಗರೆಯ ಹಿತವಾದ ಹುಣಸೆ ಹುಳಿಯಲ್ಲಿ,ಮಸಾಲೆಯಲ್ಲಿ ಸವಿದಿದ್ದಾನೆ. ಮಾವಿನ ಕಾಯಿ ಚಿತ್ರಾನ್ನವೂ ಜನಪ್ರಿಯ. ಆದರೆ ಯುಗಾದಿಯ ಸಾಂಕೇತಿಕ ಅಡುಗೆ ಅಂದರೆ ಉಗಾದಿ ಪಚಡಿ! ಬೆಲ್ಲ, ಹಸಿಮೆಣಸಿನಕಾಯಿ, ಬೇವಿನೆಲೆ, ಹುಣಿಸೇಹಣ್ಣು,ಉಪ್ಪನ್ನು ಬಳಸಿ ಮಾಡುವ ಈ ನೈವೇದ್ಯದಡುಗೆಯಲ್ಲಿ ಬದುಕಿನ ಸುಖ, ದುಗುಡ, ಕಹಿ,ಕೋಪ ಮತ್ತು ಆಶ್ಚರ್ಯ ಭಾವಗಳನ್ನು ಮೇಳೈಸಿ ಮತ್ತೆ ಬದುಕು ಹೇಗೆ ಎಲ್ಲ ಅನುಭವಗಳ ಮಿಶ್ರಣ ಎನ್ನುವುದನ್ನು ಸಾಬೀತುಮಾಡಿ ಜನರಿಗೆ ಸರಳವಾಗಿ ಅನುಭವಕ್ಕೆ ಬರುವಂತೆ ಮಾಡಿ,ಹೀಗೇ ಬದುಕನ್ನು ಎಲ್ಲ ರುಚಿಗಳಲ್ಲಿ ಅಸ್ವಾದಿಸಿ ಎನ್ನುವ ಕರೆಯನ್ನು ಯುಗಾದಿ ಹಬ್ಬದ ಮೂಲಕ ನೀಡಿದ್ದಾನೆ.

ಈ ನಿಟ್ಟಿನಲ್ಲಿ ಯುಗಾದಿ ಬರೀ ಹೊಸವರ್ಷದ ಆಚರಣೆ ಯನ್ನು ಮಾತ್ರ ಪ್ರತಿಪಾದಿಸುವ ಹಬ್ಬಮಾತ್ರವಾಗಿರದೆ ಬದುಕಿನ ಅನುಭವವನ್ನು ಸಮಚಿತ್ತನಾಗಿ ಸ್ವೀಕರಿಸಿರುವ ಮನುಷ್ಯನ ಪ್ರಬುದ್ಧತೆಯ ಶಿಖರ ಶೃಂಗವನ್ನು ತಿಳಿಸುವ ಹಬ್ಬವಾಗಿದೆ. ಬದುಕಲ್ಲಿ ಕಹಿ ಮಿಳಿತವಾಗಿದ್ದರೂ ಇನ್ನೆಲ್ಲ ಅನುಭವಗಳನ್ನು ಸೇರಿಸಿ ನೋಡಿದಲ್ಲಿ ಹೇಗೆ ಇದುಸರಳವಾಗಿ ಸ್ವೀಕೃತವಾಗಬಲ್ಲದು ಎಂಬ ಸಂದೇಶವನ್ನು ಸಾರುವ ಹಬ್ಬವಿದು. ಈ ಹಬ್ಬಕ್ಕೆ ದೇವರ ಕಥೆಗಳ ಜೋಡನೆ ಮಾಡುವ ಪ್ರಯತ್ನವೂ ಆಗಿವೆ. ಕೆಲವರು ಇದನ್ನು ಆದಿಕರ್ತ ಬ್ರಹ್ಮನು ಸೃಷ್ಟಿಯನ್ನು ಶುರುಮಾಡಿದ ಮೊದಲ ದಿನವೆಂದು ನಂಬುತ್ತಾರೆ. ಈ ದಿನ ಮನೆಗಳು ಇನ್ನಿಲ್ಲ ದಂತೆ ಬೇವು ಮತ್ತು ಮಾವಿನೆಲೆ ಗಳಿಂದ ಅಲಂಕೃತವಾಗುವುದನ್ನುಗಮನಿಸಿದ್ದೀರಷ್ಟೆ? ಇದಕ್ಕೂ ಒಂದುಉಪಕಥೆಯಿದೆ. ಆ ಪ್ರಕಾರ ಗಣೇಶ ಮತ್ತು ಕಾರ್ತಿಕೇಯರಿಬ್ಬರಿಗೂ ಮಾವು ಎಂದರೆ ಅಪಾರ ಪ್ರೀತಿ.

ಮಾವಿನ ಚಿಗುರು ಶುರುವಾಗುವುದು ಈ ವಸಂತದ ಸಮಯದಲ್ಲೇ.ಅಪತ್ತುಗಳ ನಿವಾರಕ ಗಣೇಶನನ್ನು ಈ ಸಮಯದಲ್ಲಿ ಪೂಜಿಸುವ ಪರಿಪಾಠವಿರುವುದರಿಂದ ಈ ಹಬ್ಬಕ್ಕೆ ಮಾವಿನೆಲೆಯ ತೋರಣ ಪ್ರತಿ ಮನೆಯನ್ನು ಸಿಂಗರಿಸುತ್ತದೆ. ಹೀಗೆ ಮಾಡಿರೆಂದು ಕಾರ್ತಿಕೇಯನು ಜನರಿಗೆ ಹೇಳಿದನೆಂಬ ಪ್ರತೀತಿಯಿದೆ.


ಬೇವು ಬೆಲ್ಲವನ್ನು ತಿಂದರೆ ದೇಹವು ವಜ್ರಕಾಯವಾಗಬಲ್ಲುದು ಎಂದು ಕೂಡ ಕೆಲವರು ಬರೆದಿದ್ದಾರೆ. ಹಾಗೆಂದೇ ಗಣೇಶನನ್ನು ಸ್ತುತಿಸುವ ಒಂದು ಶ್ಲೋಕ ಹೀಗೆ ಹೇಳುತ್ತದೆ:

“ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯಚ, ಸರ್ವಾರಿಷ್ಟ ವಿನಾಶಾಯ ನಿಂಬಕಂ ದಳ ಭಕ್ಷಣಂ”

ಎಂದು ನಂಬಿ ಬೇವು ಬೆಲ್ಲವನ್ನು ತಿಂದು, ಇತರರಿಗೂ ಹಂಚುತ್ತಾರೆ.ಸಂಪ್ರದಾಯದ ಪ್ರಕಾರ ಯುಗಾದಿಯ ಆಚರಣೆ ಎಣ್ಣೆ ಸ್ನಾನ,ಪೂಜೆ, ಪ್ರಾರ್ಥನೆ, ಹೋಳಿಗೆ ಊಟ, ಹೊಸಬಟ್ಟೆ, ಹೊಸ ಆಶಯಗಳು, ಇತರರಿಗೆ ಒಳಿತನ್ನು ಕೋರುವುದನ್ನು ಬಿಟ್ಟರೆ ಮತ್ತೇನು ವಿಶೇಷವಿಲ್ಲ.

ಆದರೆ, ಹಳ್ಳಿಗಳಲ್ಲಿ ಹಾಗೂ ಇನ್ನೂ ಸಂಪ್ರದಾಯ, ಆಚರಣೆ ಉಳಿಸಿ ಕೊಂಡಿರುವ ಅಗ್ರಹಾರಗಳಲ್ಲಿ, ಪುರೋಹಿ ತರು, ಪಂಡಿತರು ಯುಗಾದಿ ಯಂದು ಸ್ನಾನ ಸಂಧ್ಯಾದಿ ಮುಗಿದಬಳಿಕ, ಕುಲದೇವರನ್ನೂ ಪಂಚಾಗವನ್ನೂ ಪೂಜಿಸಿ,ಅಗಲಬಾಯಿಯ ಪಾತ್ರೆಯಲ್ಲಿ ತುಪ್ಪ ಹಾಕಿ ಮನೆಮಂದಿಯೆಲ್ಲ ಅದರಲ್ಲಿ ಮುಖ ನೋಡಿಕೊಳ್ಳುತ್ತಾರೆ. ಆನಂತರ ಕನ್ನಡಿಯಲ್ಲಿ ಮುಖ ನೋಡಿ ಕೊಳ್ಳುತ್ತಾರೆ. ಹೀಗೆ ಮಾಡುವುದರಿಂದ ಸರ್ವದೋಷ ಪರಿಹಾರ ಆಗತ್ತೆ ಎಂಬುದು ನಂಬಿಕೆ. ಸಂಜೆ ಊರಿನ ಅರಳಿ ಕಟ್ಟೆಯಲ್ಲಿ ಸೇರಿ, ಪಂಡಿತರು ಊರಿನ ಜನಕ್ಕೆ ಪಂಚಾಂಗ ಓದಿ ಹೇಳುತ್ತಾರೆ. ವರ್ಷಫಲ ಕೇಳುವ ಸಂಪ್ರದಾಯ ಹಳ್ಳಿಗಳ ಕಡೆ ಇನ್ನೂ ಜೀವಂತವಾಗಿದೆ.
ಪ್ರತಿದೇಶದಲ್ಲೂ ಹಬ್ಬವನ್ನು ತಮ್ಮ ತಮ್ಮ ಅನುಕೂಲಕ್ಕೆ ತಕ್ಕಂತೆ ಅಲ್ಪ ಸ್ವಲ್ಪ ಮಾರ್ಪಾಟು ಮಾಡಿಕೊಳ್ಳುವುದು ಸಹಜವೇ.ಯುಗಾದಿಯ ಹಬ್ಬವನ್ನು ಕೂಡ ಇದು ಹೊರತುಪಡಿಸಿಲ್ಲ. ಕರ್ನಾಟಕದ ಕೆಲವು ಭಾಗಗಳಲ್ಲಿ ಯುಗಾದಿಯ ದಿನ ಜೂಜಾಡುವುದೂ ಒಂದು ಸಂಪ್ರದಾಯ ವಾಗಿ ಬೆಳೆದುಬಿಟ್ಟಿದೆ. ಯುಗಾದಿಯ ಮಾರನೇ ದಿನವನ್ನು ವರ್ಷತೊಡಕು ಎಂದೂ ಆಚರಿಸುತ್ತಾರೆ. ಅಂದು ಮಾಂಸಾಹಾರಿಗಳು ಕಡ್ಡಾಯವಾಗಿ ಮಾಂಸದ ಊಟ ಮಾಡುತ್ತಾರೆ. ಮದ್ಯ ಸೇವನೆಯೂ ಈ ವರ್ಷತೊಡಕಿನ ಆಚರಣೆಯ ಭಾಗಗಳಲ್ಲೊಂದು.ಹಾಗಾಗಿ ಕೆಲವರಿಗೆ ಯುಗಾದಿಯ ಮಜಾ ಮಾರ ನೆಯ ದಿನದ ವರ್ಷ ತೊಡಕಿನಲ್ಲಿ ಸಿಗುತ್ತದೆ.


ಹಾಗಾಗಿ ಯುಗಾದಿ ಅಂದರೆ…. ಚಿಗುರಿನೆಲೆಗಳು ಹಾಡುವ ಪಲ್ಲವಿ, ಹಳೆಯ ಕೆಟ್ಟ ನೆನಪಿನ ಕೊನೆ, ಹೊಸತಿನ ಆಗಮನ, ಕಳೆದ ದಿನಗಳಿಗೆ ವಿದಾಯ ಮತ್ತು ಮುಂದಿನ ದಿನಗಳ ಬಗ್ಗೆ ಇತರರಿಗೆ ಶುಭವನ್ನು ಕೋರುವ, ದೇವರಲ್ಲಿ ಪ್ರಾರ್ಥಿಸುವ ಕವನ. ಅಚ್ಚುಕಟ್ಟಾಗುವ ಮನೆ, ಬಾಗಿಲಿಗೆ ತಳಿರು ತೋರಣ ,ದೇವರ ಮನೆಯ ಬಾಗಿಲಿಗೆ ಚಿಗುರು ಹಸಿರಿನ ಮಾವಿನೆಲೆಯ ಸಿಂಗಾರ, ಮನೆಯ ಮುಂದೆ ಚಿಕ್ಕಿಯ ಬಣ್ಣದ ರಂಗೋಲಿ, ಶುಭ್ರವಾಗುವ ರಾಸುಗಳು, ಅಭ್ಯಂಗನದ ಸ್ನಾನ, ಬೆಳಗುವ ಮನಸ್ಸು, ಪೂಜೆ ,ಪುನಸ್ಕಾರ, ಮುಂದಿನ ಶುಭ ದಿನಗಳಿಗಾಗಿ ದೇವರಲ್ಲಿ ಪ್ರಾರ್ಥನೆ, ಹೊಸ ಬಟ್ಟೆ, ಒಬ್ಬಟ್ಟಿನ ತಟ್ಟೆ, ಒಳ್ಳೆಯ ಮಾತು, ಶುಭ ಹಾರೈಕೆ, ಸಂಕಲ್ಪಗಳ ಹೂಮಾಲೆ ಯನ್ನು ಹೊಸೆಯುವ ಮತ್ತು ಕಳೆದ ಕಾಲದ ಪುನರಾವಲೋಕನಕ್ಕೆ ಅವಕಾಶ- ಎಲ್ಲವೂ ಹೌದು. ಜೊತೆಗೆ ಯುಗಾದಿಯ ದಿನ ಮುಂಬರುವ ವರ್ಷದ ಬಗ್ಗೆ ಮುನ್ನುಡಿಯ ಉವಾಚವನ್ನು ಕೇಳುವ ಪರಿಪಾಠವೂ ಇದೆ. ಯುಗಾದಿಯ ದಿನ ಶುರು ಮಾಡುವ ಎಲ್ಲ ಹೊಸ ಯೋಜನೆ ಗಳು ಶುಭದಾಯಕ ಎನ್ನುವ ನಂಬಿಕೆಯೂ ಇದೆ.


ಹೊಸ ಸೇರ್ಪಡೆ ಎಂದರೆ ವಿಶ್ವರತ್ನ ಮಹಾನ್ ಮಾನವತಾವಾದಿ, ಶೋಷಿತ ಜನ ವಿಮೋಚಕ ಬಾಬಾ ಸಾಹೇಬ್ ಡಾ. ಅಂಬೇಡ್ಕರ್ ಅವರ ಜನ್ಮದಿನವನ್ನೂ ಜನರು ‘ಭೀಮ ಯುಗಾದಿ’ ಎಂದು ಕರೆದಿರುವುದು. ಈ ವರ್ಷ ಆಚರಿಸುವ ಚಂದ್ರಮಾನ ಯುಗಾದಿಯು ಏಪ್ರಿಲ್ 13 ರಂದು ಮಂಗಳವಾರ ಬಂದಿದೆ. ಏಪ್ರಿಲ್ 14 ರ ಬುಧವಾರ ಬರುವ ಅಂಬೇಡ್ಕರರ ಜನ್ಮ ದಿನವನ್ನು (ವರ್ಷ ತೊಡಕಿನ ದಿನವನ್ನು) ಭೀಮ ಯುಗಾದಿ ಎಂದುಕರೆಯಲಾಗುತ್ತಿದೆ.
ಯುಗಾದಿ ನಮ್ಮ ನಾಡಿನ ಪ್ರಬುದ್ಧ ಹಬ್ಬ. ಹಿಂದೂಗಳ ಹಬ್ಬವೇ ಆದರೂ, ಈ ಹಬ್ಬದ ಹಿಂದಿನ ಮೌಲ್ಯ ಲೋಕಕ್ಕೇ ಅನ್ವಯವಾಗು ವಂತದ್ದು.ಹಾಗಾಗಿ ತತ್ವದಲ್ಲಿ ಇದು ಧರ್ಮ ವನ್ನು ಮೀರಿದ್ದು. ಮನು ಕುಲದ ಪ್ರಬುದ್ಧತೆ ಯನ್ನು, ಕಾಲವನ್ನು ಅಳೆವ, ಗುಣಿಸುವ ಬೌದ್ಧಿಕ ಮಟ್ಟದ್ದು. ಪ್ರಕೃತಿಯಲ್ಲಿನ ಬದಲಾವಣೆಗಳನ್ನು ಗುರುತಿಸಿ ಅದರೊಡನೆ ತನ್ನನ್ನು ಜೋಡಿಸಿಕೊಳ್ಳುವ ಮನುಷ್ಯನ ತಾತ್ವಿಕತೆಯನ್ನು ಮತ್ತು ಹೊಂದಾಣಿಕೆ ಯನ್ನು ತೋರುವಂತದ್ದು. ಸಾಮಾಜಿಕವಾಗಿ ಭಾರತದಲ್ಲಿದ್ದ ಸಮುದಾಯಗಳಲ್ಲಿನ ಅರೋಗ್ಯವಂತ ಮನೋಧರ್ಮವನ್ನು ಬಿಂಬಿಸುವಂತಹ ಹಬ್ಬ ಯುಗಾದಿ. ಅದಕ್ಕೆಂದೇ ಪ್ರತಿಯೊಬ್ಬರ ಬದುಕಲ್ಲಿ ಯುಗಾದಿ ಮತ್ತೆ ಮತ್ತೆ ಮರಳಿ ಬರಲಿ ಮತ್ತು ಇನ್ನಷ್ಟು ಸಂಭ್ರಮವನ್ನು , ಸಂತೋಷವನ್ನು ತರಲಿ.

ಎಲ್ಲರಿಗೂ ಯುಗಾದಿ ಹಬ್ಬದ ಶುಭ ಹಾರೈಕೆಗಳು.

🔆🔆🔆

✍️ ಡಾ. ಪ್ರೇಮಲತ ಬಿ. ಲಿಂಕನ್ ಕೌಂಟಿ, ಇಂಗ್ಲೆಂಡ್